![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 21, 2022, 1:19 PM IST
ಬೆಂಗಳೂರು: ಪಿಎಸ್ಐ ನೇಮಕ ಅಕ್ರಮ ಪ್ರಕರಣದ ತನಿಖೆಯನ್ನು ಹೈಕೋರ್ಟ್ ಮುಂದೆ ಬಲವಾಗಿ ಸಮರ್ಥಿಸಿ ಕೊಂಡಿರುವ ಸರ್ಕಾರ, ಯಾವುದೇ ಲೋಪಕ್ಕೆ ಅವಕಾಶವಿಲ್ಲದೆ ಪಾರದರ್ಶಕ ರೀತಿಯಲ್ಲಿ ಅತ್ಯಂತ ವೈಜ್ಞಾನಿಕ, ವೃತ್ತಿಪರ ಮತ್ತು ಕಾನೂನಾತ್ಮಕವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದೆ.
ಪ್ರಕರಣದಲ್ಲಿ ಆರೋಪಿಗಳಾಗಿರುವ ಸಿ.ಎನ್. ಶಶಿಧರ್, ಆರ್. ಶರತ್ ಕುಮಾರ್, ಎಚ್.ಯು.ರಘುವೀರ್, ಕೆ.ಸಿ. ದಿಲೀಪ್ ಕುಮಾರ್, ಎಚ್.ಆರ್. ಪ್ರವೀಣ್ ಕುಮಾರ್, ಕೆ.ಸೂರ್ಯ ನಾರಾಯಣ ಅವರು ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಚ್. ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್ ಪಿಪಿ) ವಿ.ಎಸ್. ಹೆಗ್ಡೆ, ಅರ್ಜಿದಾರರು ಎಸಗಿರುವುದು ಸಾಮಾನ್ಯ ಅಪರಾಧ ಕೃತ್ಯವಲ್ಲ. ಇದೊಂದು ದೊಡ್ಡ ಹಗರಣ ಹಾಗೂ ಸಮಾಜದ ಮೇಲಿನ ಭಯೋತ್ಪಾದನೆಯಾಗಿದೆ. ಒಟ್ಟು 545 ಪಿಎಸ್ಐ ಹುದ್ದೆಗಳಿಗೆ 50 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ.
ಆದರೆ, ಅರ್ಜಿದಾರರು, ಕೆಲ ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಅಭ್ಯರ್ಥಿಗಳು ಅಕ್ರಮ ನಡೆಸಿ ಇಡೀ ನೇಮಕಾತಿ ಪ್ರಕ್ರಿಯೆ ರದ್ದುಮಾಡುವ ಪರಿಸ್ಥಿತಿ ಸೃಷ್ಟಿಸಿದ್ದಾರೆ. ಅಭ್ಯರ್ಥಿಗಳ ಒಎಂಆರ್ ಶೀಟ್ಗಳನ್ನು ತಿದ್ದಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಹಲವು ಆಯಾಮಗಳಲ್ಲಿ ತನಿಖೆ ನಡೆಸಬೇಕಿದೆ. ಹೀಗಾಗಿ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡಬಾರದು ಎಂದು ನ್ಯಾಯಾಲಯವನ್ನು ಬಲವಾಗಿ ಕೋರಿಕೊಂಡರು.
ಬೇಲಿ ಎದ್ದು ಹೊಲ ಮೇಯಲು ಬಿಟ್ಟಿದ್ದೇಕೆ?: ಎಸ್ಪಿಪಿ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅಕ್ರಮ ನಡೆಸಲು ಅಧಿಕಾರಿಗಳೇ ಬಾಗಿಲು ತೆರೆದಿದ್ದಾರಲ್ಲವೇ? ಬೇಲಿಯೇ ಎದ್ದು ಹೊಲ ಮೇಯಲು ಬಿಟ್ಟಿದ್ದೇಕೆ? ಹಗರಣದಲ್ಲಿ ಭಾಗಿಯಾಗಿರುವ “ಕಪ್ಪು ಕುಳಗಳನ್ನು’ ಪತ್ತೆ ಹಚ್ಚುವುದು ಸರ್ಕಾರದ ಕರ್ತವ್ಯವಲ್ಲವೇ? ತಪ್ಪಿತಸ್ಥರನ್ನು ಕಠಿಣವಾಗಿ ದಂಡಿಸುವುದು ಸರ್ಕಾರದ ಜವಾಬ್ದಾರಿಯಲ್ಲವೇ? ಎಂದು ಪ್ರಶ್ನಿಸಿತು.
ಅದಕ್ಕೆ ಉತ್ತರಿಸಿದ ಎಸ್ಪಿಸಿ, ಯಾವುದೇ ಲೋಪಕ್ಕೆ ಅವಕಾಶವಿಲ್ಲದೆ ಪಾರದರ್ಶಕ ರೀತಿಯಲ್ಲಿ ಅತ್ಯಂತ ವೈಜ್ಞಾನಿಕ, ವೃತ್ತಿಪರ ಮತ್ತು ಕಾನೂನಾತ್ಮಕವಾಗಿ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತೀರ್ಪು ಕಾಯ್ದಿರಿಸಿದ ಹೈಕೋರ್ಟ್: ಆರೋಪಿಗಳಿಗೆ ಜಾಮೀನು ನೀಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಜಾಮೀನು ನೀಡಬಾರದು. ದಂಡ ವಿಧಿಸಿ ಜಾಮೀನು ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ಸರ್ಕಾರ ಬಲವಾಗಿ ವಾದಿಸಿತು. ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತು. ಸಾಧ್ಯವಾದರೆ ಶುಕ್ರವಾರ ತೀರ್ಪು ಪ್ರಕಟಿಸುವುದಾಗಿಯೂ ನ್ಯಾಯಪೀಠ ಹೇಳಿತು.
ಅಮೃತ್ ಪೌಲ್ ತನಿಖೆಗೆ ಸಹಕರಿಸುತ್ತಿಲ್ಲ
ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳೇ ಭಾಗಿಯಾಗಿದ್ದಾರೆ. ಇದರಿಂದ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬಂದಿದೆ. ಇದಲ್ಲದೇ ಇನ್ನೂ ಹಲವು “ಕಪ್ಪು ಕುಳ’ಗಳು ಹಗರಣದಲ್ಲಿ ಭಾಗಿಯಾಗಿದ್ದು, ಅವರನ್ನು ಪತ್ತೆ ಹಚ್ಚಬೇಕಿದೆ.
ಮಧ್ಯವರ್ತಿಗಳೊಂದಿಗಿನ ಮಾತುಕತೆಯ ಸಿಡಿಆರ್ ಲಭ್ಯವಾಗಿದೆ. ಅಮೃತ್ ಪೌಲ್ ತನಿಖೆಗೆ ಸಹಕರಿಸದ ಕಾರಣ ಮಂಪರು ಪರೀಕ್ಷೆಗೆ ಅನುಮತಿ ಕೋರಲಾಗಿದೆ. ಅವರ ಫೋನ್ ಅನ್ನು ಎಫ್ಎಸ್ ಎಲ್ಗೆ ಕಳಿಸಲಾಗಿದೆ. ನೇಮಕಾತಿ ವಿಭಾಗದ ಹೆಡ್ ಕಾನ್ಸ್ಟೇಬಲ್ ಶ್ರೀಧರ್ ಎಂಬುವರಿಂದ 2 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದೆ. ಹಗರಣದಲ್ಲಿ ಆರೋಪಿಯಾಗಿರುವ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಪಿಎಎಸ್ಐ ನವೀನ್ ಪ್ರಸಾದ್ ನಾಪತ್ತೆಯಾಗಿದ್ದಾರೆ. ಹಾಗಾಗಿ ಜಾಮೀನು ಅರ್ಜಿಗಳನ್ನು ದಂಡ ವಿಧಿಸಿ ವಜಾಗೊಳಿಸಬೇಕು ಎಂದು ಎಸ್ಪಿಪಿ ವಿ.ಎಸ್. ಹೆಗ್ಡೆ ಮನವಿ ಮಾಡಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.