Madikeri: ಗಾಳಿ ಮಳೆಯಿಂದ ವಿವಿಧೆಡೆ ಅಪಾರ ಹಾನಿ; ಜನಜೀವನ ಅಸ್ತವ್ಯಸ್ತ
ಹಲವು ಮನೆಗಳಿಗೆ ಹಾನಿ; ಮರದ ಕೊಂಬೆ ಬಿದ್ದು ಆರು ಕಾರುಗಳು ಜಖಂ
Team Udayavani, Jul 14, 2024, 6:33 PM IST
ಮಡಿಕೇರಿ: ಕೊಡಗು(Kodagu) ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಸುಮಾರು ಆರು ಕಾರುಗಳು ಜಖಂಗೊಂಡಿವೆ.
ವಿವಿಧೆಡೆ ಮನೆಗಳಿಗೆ ಹಾನಿಯಾಗಿದೆ, ಮರಗಳು, ವಿದ್ಯುತ್ ಕಂಬಗಳು ಬಿದ್ದಿವೆ. ವಿದ್ಯುತ್ ತಂತಿ ಬಿದ್ದು ಹಸುವೊಂದು ಮೃತಪಟ್ಟಿದೆ.
ಕಳೆದೆರಡು ದಿನಗಳಿಂದ ಶಾಂತವಾಗಿದ್ದ ಮಳೆ ಭಾನುವಾರದಿಂದ ಮತ್ತೆ ತೀವ್ರತೆಯನ್ನು ಪಡೆದುಕೊಂಡಿದೆ. ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಟ್ಟಗುಡ್ಡದ ಮೇಲೆ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಮಡಿಕೇರಿ ನಗರದಿಂದ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಚೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿದರು.
ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಆರು ಕಾರುಗಳು ಜಖಂಗೊಂಡಿರುವ ಘಟನೆ ಸೋಮವಾರಪೇಟೆಯ ರೆಸಾರ್ಟ್ವೊಂದರ ಸಮೀಪ ನಡೆದಿದೆ. ಪ್ರವಾಸಿಗರು ಹಾಗೂ ಟ್ಯಾಕ್ಸಿ ಚಾಲಕರು ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆಗೊಳಿಸಿದ್ದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಸ್ಥಳದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ವಿದ್ಯುತ್ ಪ್ರವಹಿಸಿ 3 ತಿಂಗಳ ಗಬ್ಬದ ಹಸು ಸಾವಿಗೀಡಾಗಿರುವ ಘಟನೆ ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸುರೇಶ್ ಎಂಬುವವರಿಗೆ ಸೇರಿದ ಹಸು ಇದಾಗಿದೆ.ಶನಿವಾರಸಂತೆ ಹೋಬಳಿಯ ಗೌಡಳ್ಳಿ ಗ್ರಾ.ಪಂ ವ್ಯಾಪ್ತಿಯ ಚನ್ನಾಪುರ ಗ್ರಾಮದ ನಿವಾಸಿ ಲಕ್ಷ್ಮೀ ಎಂಬುವವರಿಗೆ ಸೇರಿದ ಮನೆಗೆ ಮಳೆಯಿಂದ ಭಾಗಶಃ ಹಾನಿಯಾಗಿದೆ.
ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾ.ಪಂ ವ್ಯಾಪ್ತಿಯ ಅತ್ತೂರು ಗ್ರಾಮದಲ್ಲಿ ಜನಾರ್ಧನ್ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದೆ. ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಗುಡ್ಡೆಹೊಸೂರು ಗ್ರಾ.ಪಂ ಅಧಿಕಾರಿ ಸುಮೇಶ್, ಕಂದಾಯ ನಿರೀಕ್ಷಕ ಸಂತೋಷ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಗೌತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸ್ಥಳಾಂತರ
ಸಂಪಾಜೆ ಹೋಬಳಿಯ ಮೇಕೇರಿ ಗ್ರಾಮದ ಆಯಿಷಾ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಉಳಿದ ಭಾಗ ಬಿರುಕು ಬಿಟ್ಟಿದೆ. ಇಲ್ಲಿ ವಾಸ ಇದ್ದವರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಹಲವು ಗ್ರಾಮಗಳು ವಿದ್ಯುತ್ ಕೊರತೆ ಎದುರಿಸುತ್ತಿವೆ.
ಅತಿಹೆಚ್ಚು ಮಳೆಯಾಗುವ ಕಾವೇರಿಯ ಉಗಮ ಸ್ಥಾನ ತಲಕಾವೇರಿ, ಭಾಗಮಂಡಲ ಮತ್ತು ನಾಪೋಕ್ಲು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಯಾವುದೇ ಹಾನಿಗಳು ಸಂಭವಿಸಿಲ್ಲ ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನಿಧಾನವಾಗಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಮಡಿಕೇರಿ ನಗರ, ಗಾಳಿಬೀಡು, ಕಾಲೂರು, ಮುಕ್ಕೋಡ್ಲು, ಬೆಟ್ಟಗೇರಿ, ಬಿಳಿಗೇರಿ, ಕರಿಕೆ, ಪೆರಾಜೆ, ಸಂಪಾಜೆ, ಸಿದ್ದಾಪುರ, ಕರಡಿಗೋಡು, ನೆಲ್ಲಿಹುದಿಕೇರಿ, ಸುಂಟಿಕೊಪ್ಪ, ಕುಶಾಲನಗರ, ಹಾರಂಗಿ, ಕೂಡಿಗೆ, ಸೋಮವಾರಪೇಟೆ, ಮಾದಾಪುರ, ಶಾಂತಳ್ಳಿ ಮತ್ತು ಶ್ರೀಮಂಗಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿಹೆಚ್ಚು ಐದೂವರೆ ಇಂಚಿಗೂ ಅಧಿಕ ಮಳೆಯಾಗಿದೆ.
ನಾಪೋಕ್ಲುವಿನಲ್ಲಿ ಮೂರೂವರೆ ಇಂಚು ಮಳೆಯಾಗಿದೆ. ಮಡಿಕೇರಿ ನಗರದಲ್ಲಿ ಮಂಜು ಸಹಿತ ಮೈಕೊರೆಯುವ ಚಳಿ ಇದ್ದು, ನಿರಂತರ ಗಾಳಿ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ನದಿ, ಬೆಟ್ಟ ಪ್ರದೇಶದಲ್ಲಿ ಆತಂಕ
ಜಿಲ್ಲೆಯಲ್ಲಿ ನಿರತಂತರವಾಗಿ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಬೆಟ್ಟಗುಡ್ಡ, ತಗ್ಗು ಪ್ರದೇಶ ಮತ್ತು ನದಿಯ ಆಸುಪಾಸಿನಲ್ಲಿರುವ ನಿವಾಸಿಗಳು ಆತಂಕಗೊಂಡಿದ್ದಾರೆ. ಸ್ಥಳೀಯ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದೆ.
ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಎನ್ಡಿಆರ್ ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಆಡಳಿತ ಸನ್ನದ್ಧವಾಗಿರಬೇಕೆಂದು ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.