Hubli; ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಗಿಫ್ಟ್: ಜೋಶಿ ಆಕ್ರೋಶ
Team Udayavani, Sep 3, 2024, 4:17 PM IST
ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬೆಂಬಲ ಬೆಲೆಯ ಗಿಫ್ಟ್ ಕೊಟ್ಟರೆ, ರಾಜ್ಯ ಸರ್ಕಾರ ಹಾಲಿನ ಬೆಲೆ ಕಡಿತದ ಕೊಡುಗೆ ಕೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ಬೆಲೆ ಕುಸಿತದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರೂ., 2 ರೂ. ವರೆಗೂ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ ಎಂದು ಜೋಶಿ ಖಂಡಿಸಿದ್ದಾರೆ.
ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರದ ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲಿನ ದರ ಕಡಿತಗೊಳಿಸಿ ಹೈನುಗಾರರನ್ನು ಹೈರಾಣಾಗಿಸಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು. ಆದರೀಗ 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್ ಗೆ 28, 29 ರೂ. ನೀಡುತ್ತಿವೆ. ಕೆಲವೆಡೆ ಇದಕ್ಕೂ ಖೋತಾ ಆಗಿದೆ. ಹಾಲು ಉತ್ಪಾದಕರು ದರ ಕಡಿತಕ್ಕೆ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟ ನಷ್ಟದ ಸಬೂಬು ಹೇಳುತ್ತಿದೆ. ನಷ್ಟದ ನೆಪದಲ್ಲಿ ಸರ್ಕಾರ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಬರೆ ಎಳೆದಿದೆ ಎಂದು ಸಚಿವರು ಖಂಡಿಸಿದ್ದಾರೆ.
ಹೈನುಗಾರಿಕೆಯಲ್ಲಿ ನಿಜವಾಗಿ ನಷ್ಟದಲ್ಲಿ ಇರುವುದು ರೈತರು. ಹಾಲು ಉತ್ಪಾದನೆ ವೆಚ್ಚ ದುಪ್ಪಟ್ಟಾಗಿದೆ. ಹಸು, ಎಮ್ಮೆಗಳ ಬೆಲೆ ಹೆಚ್ಚಿದೆ. ಪಶು ಆಹಾರ ಬೆಲೆಯೂ ದುಪ್ಪಟ್ಟಾಗಿ ಸಾಕಾಣಿಕೆ ದುಬಾರಿಯಾಗಿದೆ. ಇತ್ತ ನ್ಯಾಯಯುತ ದರವೂ ದಕ್ಕುತ್ತಿಲ್ಲ ಎಂದು ಸಚಿವ ಜೋಶಿ ಹೇಳಿದ್ದಾರೆ.
2013-14ರಲ್ಲಿ ನಂದಿನಿ ಹಾಲಿನ ಬೆಲೆ ಲೀಟರ್ ಗೆ 29 ರೂ. ಇತ್ತು, 2024ರಲ್ಲಿ ಅರ್ಧ ಲೀಟರ್ ಹಾಲಿಗೆ ಇಷ್ಟು ಬೆಲೆಯಿದೆ. ಅಂದರೆ ಹತ್ತು ವರ್ಷದಲ್ಲಿ ಗ್ರಾಹಕರಿಗೆ ಶೇ.100ರಷ್ಟು ಬೆಲೆಯ ಹೊರೆ ಹೇರಲಾಗಿದೆ. ಆದರೆ ರೈತರಿಗೆ ಶೇ.10 ರಷ್ಟೂ ಬೆಲೆ ಹೆಚ್ಚಿಲ್ಲ. ಈಗಲೂ 2014ರಲ್ಲಿ ಇದ್ದಷ್ಟೇ ಇದೆ. ಅತ್ಯಂತ ಕನಿಷ್ಠ ದರ 26 ರಿಂದ 29 ರೂ.ಲೀಟರ್ ಗೆ ದಕ್ಕುತ್ತಿದೆ ಎಂದು ಸಚಿವರು ವಿಷಾದಿಸಿದ್ದಾರೆ.
ಸರ್ಕಾರ 2 ತಿಂಗಳ ಹಿಂದೆ 2 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ಬರೆ ಎಳೆದಿತ್ತು. ಈಗ ಖರೀದಿ ಬೆಲೆ ಕಡಿತಗೊಳಿಸಿ ಉತ್ಪಾದಕರಿಗೂ ಬರೆ ಎಳೆದಿದೆ ಎಂದಿದ್ದಾರೆ.
ಹಾಲಿನ ಗುಣಮಟ್ಟದ ನೆಪದಲ್ಲಿ ಐದಾರು ರೂಪಾಯಿ ಪ್ರೋತ್ಸಾಹ ಧನಕ್ಕೂ ಕೊಕ್ ಹಾಕುತ್ತಿದೆ. ರಾಜ್ಯ ಸರ್ಕಾರ, ಈ ರೀತಿ ಪ್ರೋತ್ಸಾಹ ಧನ ಉಳಿಕೆ, ಖರೀದಿ ದರ ಕಡಿತ, ಮಾರಾಟ ದರ ಹೆಚ್ಚಳ ರೂಪದಲ್ಲಿ ಲೀಟರ್ ಹಾಲಿನ ಮೇಲೆ ಹತ್ತಾರು ರೂಪಾಯಿ ಹೆಚ್ಚುವರಿ ಆದಾಯದ ಮಾರ್ಗ ಕಂಡುಕೊಂಡಿದೆ. ಹೀಗಿರುವಾಗ ನಷ್ಟ ಹೇಗೆಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.
ಹಾಲು ಒಕ್ಕೂಟಗಳು ನಷ್ಟದಲ್ಲಿ ಇದ್ದರೆ ಮೊದಲು ಹಾಲು ಒಕ್ಕೂಟ, ಶೀತಲೀಕರಣ ಘಟಕ ಹಾಗೂ ಹಾಲು ಸಂಗ್ರಹ ಕೇಂದ್ರಗಳಲ್ಲಿ ಆಗುತ್ತಿರುವ ಸೋರಿಕೆಯನ್ನೇ ತಡೆ ಗಟ್ಟಿದರೆ ಸಾಕು. ಒಂದೆಡೆ ಮೇವು, ಪಶು ಆಹಾರ ಬೆಲೆ ಹೆಚ್ಚಳ, ಇನ್ನೊಂದೆಡೆ ಹಾಲು ಒಕ್ಕೂಟಗಳು ಮತ್ತು ಸರ್ಕಾರದಿಂದ ವಂಚನೆ. ಹೀಗಾಗಿ ರಾಜ್ಯದ ಅನೇಕ ಗ್ರಾಮಗಳಲ್ಲಿ ಇಂದು ಸಣ್ಣಪುಟ್ಟ ರೈತರು ಹೈನುಗಾರಿಕೆಯಿಂದಲೇ ವಿಮುಖರಾಗುವಂತಾಗಿ, ಹೈನುಗಾರಿಕೆ ಪ್ರಭಾವಿಗಳ ಸ್ವತ್ತಾಗಲಿದೆ ಎಂದು ಜೋಶಿ ಎಚ್ಚರಿಸಿದ್ದಾರೆ.
ನಮ್ಮದು ರೈತಪರ ಸರ್ಕಾರ, ಜನಪರ ಸರ್ಕಾರ ಎನ್ನುವ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವುಗಳನ್ನೇ ತೆಗೆದುಕೊಳ್ಳುತ್ತಿದ್ದು, ನಾಚಿಕೆಯಾಗಬೇಕು. ರಾಜ್ಯ ಸರ್ಕಾರ ಕೂಡಲೇ ಬೆಲೆ ಕಡಿತದ ಆದೇಶ ಹಿಂಪಡೆಯಬೇಕು. ಹಾಲು ಉತ್ಪಾದಕರಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.