![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 10, 2019, 3:00 AM IST
ಮೈಸೂರು: ಕಾಫಿ ನಾಡು ಕೊಡಗು ಜಿಲ್ಲೆಯನ್ನು ಒಳಗೊಂಡಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಕಾಂಗ್ರೆಸ್ ಅಭ್ಯರ್ಥಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.
ಕೊಡಗು ಜಿಲ್ಲೆಯನ್ನು ಹೊರತುಪಡಿಸಿ ನೋಡಿದರೆ ಮೈಸೂರು ಜಿಲ್ಲೆಯಲ್ಲಿ ಸಮಬಲ ಹೊಂದಿರುವ ಕಾಂಗ್ರೆಸ್-ಜೆಡಿಎಸ್ ಈ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ತ್ರಿಕೋನ ಸ್ಪರ್ಧೆ ಬದಲಿಗೆ ಕಾಂಗ್ರೆಸ್-ಬಿಜೆಪಿ ನಡುವೆ ನೇರಾ ನೇರ ಸ್ಪರ್ಧೆಗೆ ಅಖಾಡ ಸಿದ್ಧವಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಬಿಎಸ್ಪಿ ಈ ಚುನಾವಣೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಹಾಘಟಬಂಧನ್ನಿಂದ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಜೆಡಿಎಸ್ ಜತೆಗಿನ ಮೈತ್ರಿ ಕಡಿದುಕೊಂಡಿರುವ ಬಿಎಸ್ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಕದನ ಕಣದಲ್ಲಿ 22 ಅಭ್ಯರ್ಥಿಗಳಿದ್ದರೂ ಬಿಜೆಪಿ -ಕಾಂಗ್ರೆಸ್ ನಡುವೆಯೇ ನೇರ ಹಣಾಹಣಿ ನಡೆಯಲಿದೆ. ಬಿಜೆಪಿಯಿಂದ ಎರಡು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಿ.ಎಚ್.ವಿಜಯಶಂಕರ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ. ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಪುನರಾಯ್ಕೆ ಬಯಸಿ ಕಣದಲ್ಲಿದ್ದಾರೆ.
ಪ್ರತಾಪ್ ಸಿಂಹ, ಪ್ರಧಾನಿ ನರೇಂದ್ರ ಮೋದಿ ನಾಮಬಲದ ಜೊತೆಗೆ ಸಂಸದರಾಗಿ ಐದು ವರ್ಷಗಳ ಕಾಲ ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳ ಆಧಾರದ ಮೇಲೆ ಎರಡನೇ ಬಾರಿಗೆ ಸಂಸತ್ ಪ್ರವೇಶಿಸುವ ಹುಮ್ಮಸ್ಸಿನಲ್ಲಿದ್ದಾರೆ.
ಸಿ.ಎಚ್.ವಿಜಯಶಂಕರ್ ಈ ಹಿಂದೆ ಎರಡು ಬಾರಿ ಸಂಸದರಾಗಿ ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳು, ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆ ಜಿಲ್ಲೆಯಲ್ಲಿ ತಮಗಿರುವ ಹಿಡಿತ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿನ ಮೇಲೆ ಮತಯಾಚನೆ ಮಾಡುತ್ತಿದ್ದು, ಬಿಜೆಪಿ ವಿರೋಧಿ ಮತಗಳನ್ನು ಒಗ್ಗೂಡಿಸಿಕೊಂಡು ಗೆದ್ದು ಬರುವ ಉಮೇದಿನಲ್ಲಿದ್ದಾರೆ.
ಆದರೆ, ಕಾಂಗ್ರೆಸ್ ಜೊತೆಗೆ ಪ್ರಚಾರಕ್ಕೆ ಹಿಂದೇಟು ಹಾಕಿದ್ದ ಸ್ಥಳೀಯ ದಳಪತಿಗಳು ವರಿಷ್ಠರ ಮಾತಿಗೆ ಕಟ್ಟುಬಿದ್ದು ಈಗಲೂ ಒಲ್ಲದ ಮನಸ್ಸಿನಿಂದಲೇ ಕೈ ಹಿಡಿಯಲು ಮುಂದಾಗಿದ್ದರೂ ಮಂಡ್ಯ, ಹಾಸನ, ತುಮಕೂರು ಕ್ಷೇತ್ರಗಳಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ದಳಪತಿಗಳು ಒಳಏಟು ಕೊಡಬಹುದು ಎಂಬ ಆತಂಕ ಕಾಂಗ್ರೆಸ್ಸಿಗರಿಗೆ ಇದ್ದೇ ಇದೆ.
ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳ ಬಿಗಿ ಹಿಡಿತ ಇರುವ ಕ್ಷೇತ್ರದಲ್ಲಿ ಬಿಜೆಪಿ ಸ್ಥಳೀಯ ಚುನಾವಣೆಗಳಲ್ಲಿ ತನ್ನ ಅಸ್ತಿತ್ವ ತೋರದಿದ್ದರೂ ಸಂಸತ್ ಚುನಾವಣೆಯಲ್ಲಿ ತನ್ನ ಪ್ರಾಬಲ್ಯ ಮೆರೆಯುತ್ತಾ ಬಂದಿದೆ. ಹೀಗಾಗಿ ಹಠಕ್ಕೆ ಬಿದ್ದು ಈ ಕ್ಷೇತ್ರವನ್ನು ಕಾಂಗ್ರೆಸ್ ಪಾಲಿಗೆ ಉಳಿಸಿಕೊಂಡು, ತಾವೇ ಮುಂದೆ ಆಸಕ್ತಿವಹಿಸಿ ಬಿಜೆಪಿಯಿಂದ ಕರೆತಂದಿರುವ ವಿಜಯಶಂಕರ್ಗೆ ಟಿಕೆಟ್ ಕೊಡಿಸುವಲ್ಲಿ ಸಫಲವಾಗಿರುವ ಸಿದ್ದರಾಮಯ್ಯ ಅವರಿಗೆ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಇದಕ್ಕಾಗಿಯೇ ಈಗಾಗಲೇ ಮೈಸೂರಿನಲ್ಲಿ ಮೂರ್ನಾಲ್ಕು ಸಭೆಗಳನ್ನು ಮಾಡಿ, ಸ್ಥಳೀಯ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿರುವ ಜೊತೆಗೆ, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಿದ ಜಿ.ಟಿ.ದೇವೇಗೌಡರ ಜೊತೆಗೆ ರಾಜಕೀಯ ವೈರತ್ವ ಮರೆತು ಮಾತನಾಡಿ,
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ, ನೀವು ಮಂತ್ರಿಯಾಗಿ ಮುಂದುವರಿಯಬೇಕು, ಹೀಗಾಗಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಿ ಎಂದಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲದಿದ್ದರೂ ತ್ರಿಕೋನ ಸ್ಪರ್ಧೆ ಇದ್ದಾಗ 1.5 ಯಿಂದ 2 ಲಕ್ಷ ಮತಗಳನ್ನು ಪಡೆದಿದೆ.
ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಗಳ ಜೊತೆಗೆ ಜೆಡಿಎಸ್ನ ಈ ಮತಗಳು ಮೈತ್ರಿ ಅಭ್ಯರ್ಥಿಗೆ ವರ್ಗಾವಣೆಯಾದರೆ ಗೆಲುವು ಸಾಧ್ಯ ಎಂಬುದು ಕಾಂಗ್ರೆಸ್ಸಿಗರ ಲೆಕ್ಕಾಚಾರ. ಆದರೆ, ಬಿಜೆಪಿ ತನ್ನ ಸಾಂಪ್ರದಾಯಿಕ ಮತಗಳ ಜೊತೆಗೆ, ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು ಎಂಬ ಯುವ ಮತದಾರರ ಮತಗಳು, ಜೆಡಿಎಸ್ ಒಲ್ಲದ ಮನಸ್ಸಿನಿಂದ ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಜೆಡಿಎಸ್ನ ಬಹುಪಾಲು ಮತ ಬಿಜೆಪಿಗೆ ಬರಲಿದೆ ಎಂಬ ಲೆಕ್ಕಾಚಾರದಲ್ಲಿದೆ.
ಕ್ಷೇತ್ರ ವ್ಯಾಪ್ತಿ: ಕ್ಷೇತ್ರ ಪುನರ್ ವಿಂಗಡಣೆ ನಂತರ ಕೊಡಗು ಜಿಲ್ಲೆಯ ಮಡಿಕೇರಿ ಹಾಗೂ ವಿರಾಜಪೇಟೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಚಾಮರಾಜ, ಕೃಷ್ಣರಾಜ, ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಒಳಗೊಂಡಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಲ್ವರು ಬಿಜೆಪಿ, ಮೂವರು ಜೆಡಿಎಸ್ ಶಾಸಕರಿದ್ದರೆ, ಕಾಂಗ್ರೆಸ್ನ ಒಬ್ಬರೇ ಶಾಸಕರಿದ್ದಾರೆ.
ಮತದಾರರು
ಒಟ್ಟು ಮತದಾರರು: 18,58,986
ಪುರುಷರು: 9,28,930
ಮಹಿಳೆಯರು: 9,30,056
ಜಾತಿ ಲೆಕ್ಕಾಚಾರ
-ಒಕ್ಕಲಿಗ-4 ಲಕ್ಷ
-ಲಿಂಗಾಯತ- 2.5 ಲಕ್ಷ
-ಕುರುಬ- 2ಲಕ್ಷ
-ದಲಿತ-2 ಲಕ್ಷ
-ಓಬಿಸಿ- 3 ಲಕ್ಷ
-ಬ್ರಾಹ್ಮಣ- 1ಲಕ್ಷ
-ಮುಸ್ಲಿಂ-2 ಲಕ್ಷ
-ನಾಯಕ-1 ಲಕ್ಷ
-ಇತರರು-1 ಲಕ್ಷ
* ಗಿರೀಶ್ ಹುಣಸೂರು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.