ವಿದ್ಯಾರ್ಥಿ ವೇತನ ಕೈ ತಪ್ಪುವ ಆತಂಕ
Team Udayavani, Oct 9, 2018, 12:19 PM IST
ಬೆಂಗಳೂರು: ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅ.31ಕೊನೆಯ ದಿನವಾಗಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಈವರೆಗೆ ಶೇ.24ರಷ್ಟು ಮಕ್ಕಳು ಮಾತ್ರ ಅರ್ಜಿ ಸಲ್ಲಿಸಿದ್ದಾರೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಕೆಯನ್ನು ಕಡ್ಡಾಯಗೊಳಿಸಿರುವುದು ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಂದಾಗಿ ಶೇ.40ರಷ್ಟು ಅರ್ಹ ಬಡ ಮಕ್ಕಳು ವಿದ್ಯಾರ್ಥಿ ವೇತನದಿಂದ ವಂಚಿತರಾಗುವ ಆತಂಕ ಮೂಡಿದೆ. ಇಡೀ ಯೋಜನೆಗೆ ಒಗ್ಗಿಕೊಳ್ಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಕ್ಕಳು ವಿದ್ಯಾರ್ಥಿ ವೇತನದಿಂದ ವಂಚಿತರಾಗದಿರಲಿ ಎಂಬ ಸದುದ್ದೇಶದಿಂದ ಸರ್ಕಾರ ಪ್ರಸಕ್ತ ಸಾಲಿನಿಂದ ಸುಧಾರಿತ “ಸ್ಕಾಲರ್ಶಿಪ್ ಪೋರ್ಟಲ್’ ಯೋಜನೆ ಜಾರಿಗೊಳಿಸಿದೆ. ಇದರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಗರ ಜಿಲ್ಲಾಡಳಿತ ಕ್ರಿಯಾ ಯೋಜನೆ ರೂಪಿಸಿದೆ. ಆದರೆ ಇದಕ್ಕೆ ಈಗ ಹಲವು ವಿಘ್ನಗಳು ಎದುರಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಗುರಿ ತಲುಪಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲಾಡಳಿತ ವ್ಯಾಪ್ತಿಯಲ್ಲಿ ಸುಮಾರು 2 ಲಕ್ಷ ವಿದ್ಯಾರ್ಥಿಗಳು “ಸ್ಕಾಲರ್ಶಿಪ್ ಪೋರ್ಟಲ್’ ಯೋಜನೆಗೆ ಅರ್ಹರಾಗಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು ಮಕ್ಕಳು ಇನ್ನೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿಲ್ಲ. ಸಕಾಲಕ್ಕೆ ಸರಿಯಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕೈಸೇರದಿರುವುದು, ಆಧಾರ್ ಕಾರ್ಡ್ ಸಂಖ್ಯೆ ಹೊಂದಾಣಿಕೆಯಾಗದಿರುವುದು, ಸರ್ವರ್ನಲ್ಲಿ ತಾಂತ್ರಿಕ ಅಡಚಣೆ, ನಿಧಾನಗತಿ ಪ್ರಕ್ರಿಯೆಯಿಂದಾಗಿ ಕ್ರಿಯಾ ಯೋಜನೆ ಅನುಷ್ಠಾನಕ್ಕೆ ಅಡ್ಡಿಯಾಗಿದೆ.
ವಲಸಿಗರ ಬಳಿ ಅಗತ್ಯ ದಾಖಲೆಗಳಿಲ್ಲ: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬೇರೆ ರಾಜ್ಯಗಳಿಂದ ಮತ್ತು ಜಿಲ್ಲೆಗಳಿಂದ ಕೂಲಿ ಕೆಲಸ, ಉದ್ಯೋಗ ಅರಸಿ ವಲಸೆ ಬಂದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆರ್ಥಿಕವಾಗಿ ತೀರಾ ಹಿಂದುಳಿದ ಕುಟುಂಬಗಳ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಿದ್ದಾರೆ.
ಆದರೆ ಈ ರೀತಿಯ ಬಹುಪಾಲು ಮಕ್ಕಳ ಪೋಷಕರ ಬಳಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಇಲ್ಲ. ಈ ಕಾರಣದಿಂದಾಗಿ ಸುಧಾರಿತ “ಸ್ಕಾಲರ್ಶಿಪ್ ಪೋರ್ಟಲ್’ ಯೋಜನೆ ಜಾರಿ ಕಗ್ಗಂಟಾಗಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಶೇ.60 ಗುರಿಯೂ ಅಸಾಧ್ಯ: ಕಳೆದ ಬಾರಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಶೇ.75ರಷ್ಟು ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿತ್ತು. ಈ ಬಾರಿ ಅಷ್ಟು ಪ್ರಮಾಣದಲ್ಲೂ ವಿದ್ಯಾರ್ಥಿ ವೇತನ ನೀಡುವ ಲಕ್ಷಣ ಕಾಣುತ್ತಿಲ್ಲ. ಅ.31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಇದೇ ಪ್ರಮಾಣದಲ್ಲಿ ಅರ್ಜಿ ಸಲ್ಲಿಕೆಯಾದರೆ ಶೇ.60ರಷ್ಟು ಗುರಿ ತಲುಪುವುದೂ ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ.
ಶಿಕ್ಷಕರ ನೆರವು ವ್ಯರ್ಥ: ಆನ್ಲೈನ್ ಅರ್ಜಿ ಸಲ್ಲಿಕೆ ವ್ಯವಸ್ಥೆ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಗೊಂದಲವಿದೆ. ಇದೇ ಮೊದಲ ಬಾರಿಗೆ ಈ ಸುಧಾರಿತ ವ್ಯವಸ್ಥೆಯನ್ನು ಪರಿಚಯಿಸಿದ್ದು, ಅರ್ಜಿ ಸಲ್ಲಿಕೆ ಸಂಬಂಧ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷಕರು ನೆರವಾಗುತ್ತಿದ್ದಾರೆ. ಆದರೆ, ಸರ್ವರ್ನಲ್ಲಿ ಕಂಡುಬಂರುತ್ತಿರುವ ನೆಟ್ವರ್ಕ್ ಅಥವಾ ತಾಂತ್ರಿಕ ಸಮಸ್ಯೆಯಿಂದಾಗಿ ಶಿಕ್ಷಕರ ಶ್ರಮ ವ್ಯರ್ಥವಾಗುತ್ತಿದೆ ಎಂಬ ಆರೋಪ ಶಿಕ್ಷಕರ ವಲಯದಿಂದ ಕೇಳಿಬಂದಿದೆ.
ಬ್ಯಾಂಕ್ಗಳಿಂದ ಸಿಗದ ಸಹಕಾರ: ಅನೇಕಲ್ ತಾಲೂಕಿನ ವ್ಯಾಪ್ತಿಯಲ್ಲಿ ಕೆಲವು ಬ್ಯಾಂಕ್ಗಳು ವಿದ್ಯಾರ್ಥಿಗಳಿಗೆ ಶೂನ್ಯ ಠೇವಣಿ (ಜೀರೋ ಬ್ಯಾಲೆನ್ಸ್) ಖಾತೆ ತೆರೆಯಲು ಆಸಕ್ತಿ ತೋರುತ್ತಿಲ್ಲ. ಇದು ಕೂಡ ಯೋಜನೆ ಜಾರಿ ವಿಳಂಬಕ್ಕೆ ಕಾರಣವಾಗಿದೆ.
ಬೆಂಗಳೂರು ನಗರ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳು ಈ ಹಿಂದೆ ಜಿಲ್ಲಾ ಬ್ಯಾಂಕ್ ಅಧಿಕಾರಿಗಳ ಸಭೆಯಲ್ಲಿ ಈ ಸಮಸ್ಯೆಯನ್ನು ಲೀಡ್ ಬ್ಯಾಂಕ್ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. ಅಲ್ಲದೇ ಬಡ ವಿದ್ಯಾರ್ಥಿಗಳಿಗೆ ನೆರವಾಗುವಂತೆ ಮನವಿ ಮಾಡಿದ್ದರು. ಲೀಡ್ ಬ್ಯಾಂಕ್ನ ಲೀಡ್ ಮುಖ್ಯಸ್ಥರು ಕೂಡ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎನ್ನಲಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಣೆ ಪ್ರಕ್ರಿಯೆ ವಿಳಂಬದಿಂದ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು, ಇದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಗತ್ಯ ಪ್ರಮಾಣ ಪತ್ರಗಳನ್ನು ತ್ವರಿತವಾಗಿ ವಿತರಿಸುವಂತೆ ಡಿಸಿ ಸೂಚಿಸಿದ್ದಾರೆ. ಎಲ್ಲ ಅರ್ಹ ವಿದ್ಯಾರ್ಥಿಗಳು ಸಕಾಲದಲ್ಲಿ ಅರ್ಜಿ ಸಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.
-ಎಂ.ಎಸ್.ಅರ್ಚನಾ, ಬೆಂಗಳೂರು ನಗರ ಜಿ.ಪಂ ಸಿಇಒ
* ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ
Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.