![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 23, 2023, 1:26 PM IST
ದೇವನಹಳ್ಳಿ: ರಾಜ್ಯ ಮತ್ತು ಕೇಂದ್ರದಲ್ಲಿ ಅಭಿವೃದ್ಧಿ ಆಗಬೇಕಾದರೆ ಅದು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಜನರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಕೆಲಸ ಮಾಡು ತ್ತಿದ್ದರೂ, ವಿರೋಧ ಪಕ್ಷದವರು ಅಪ ಪ್ರಚಾರ ಮಾಡುವುದಕ್ಕೆ ಸೀಮಿತರಾಗಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ಜನಪರ ಕಾರ್ಯ ಕ್ರಮ ಮಾಡಿ ಪ್ರತಿ ಜನರಿಗೂ ಸೌಲಭ್ಯಗಳು ಸಿಗುವಂತೆ ಮಾಡಿದ್ದಾರೆ. ವಿಜಯ ಸಂಕಲ್ಪ ಅಭಿಯಾನದ ಮೂಲಕ ಪ್ರತಿ ಮನೆ ಮನೆಗೆ ತೆರಳಿ ಸರ್ಕಾರದ ಸಾಧನೆಗಳನ್ನು ತಿಳಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ. ನಾರಾಯಣಸ್ವಾಮಿ ಮಾತನಾಡಿ, ಜಿಲ್ಲಾದ್ಯಂತ ವಿಜಯ ಸಂಕಲ್ಪ ಅಭಿಯಾನವನ್ನು ಮಾಡಿ ಪ್ರತಿ ಬೂತ್ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಪ್ರತಿ ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ತಿಳಿಸಬೇಕು. 2023ರ ಚುನಾವಣೆಯಲ್ಲಿ ದೇವನಹಳ್ಳಿ ತಾಲೂಕಿನಿಂದ ಶಾಸಕರನ್ನು ಗೆಲ್ಲಿಸಬೇಕು ಎಂದು ಹೇಳಿದರು.
29ರವರೆಗೆ ವಿಜಯ ಸಂಕಲ್ಪ ಅಭಿಯಾನ: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ಬಿಜೆಪಿ ಪಕ್ಷವು ಜ.21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನದ ಮೂಲಕ ಪ್ರತಿ ಬೂತ್ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಪ್ರತಿ ಮನೆ ಮನೆಗೆ ತೆರಳಿ ಪಕ್ಷದ ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಲಾಗುತ್ತಿದೆ. ಚುನಾವಣೆ ಸಮೀಪದಲ್ಲಿರುವುದರಿಂದ ಇಂತಹ ಕಾರ್ಯಕ್ರಮಗಳ ಮೂಲಕ ಜನರಿಗೆ ಮಾಹಿತಿ ನೀಡಲು ಸಹಕಾರಿ ಆಗಿದೆ ಎಂದು ಹೇಳಿದರು.
ಫಲಾನುಭವಿಗಳಿಗೆ ಅರಿವು ಮೂಡಿಸಿ: ಮಾಜಿ ಶಾಸಕ ಜಿ. ಚಂದ್ರಣ್ಣ ಮಾತನಾಡಿ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ವಿರೋಧ ಪಕ್ಷದ ಮುಖಂಡರಿಗಿಂತ ಶಕ್ತಿಯುತವಾಗಿದ್ದಾರೆ. ದೇವನಹಳ್ಳಿಯಲ್ಲಿ ಕಮಲ ಅರಳಲು ಸಧೃಢಗೊಂಡಿದೆ. ಸರ್ಕಾರದ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು. ಬಿಜೆಪಿಯ ಜನಪರ ಕಾರ್ಯಗಳ ಕುರಿತು ಮಾಹಿತಿ ನೀಡಬೇಕು ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ಸುಂದರೇಶ್, ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎಂ. ರವಿಕುಮಾರ್, ಅಶ್ವತ್ಥನಾರಾಯಣ್, ನಿಲೇರಿ ಅಂಬರೀಶ್ ಗೌಡ, ತಾಪಂ ಮಾಜಿ ಅಧ್ಯಕ್ಷ ಓಬದೇನಹಳ್ಳಿ ಮುನಿಯಪ್ಪ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ನೀಲೇರಿ ಮಂಜುನಾಥ್, ರವಿಕುಮಾರ್, ತಾಲೂಕು ಖಜಾಂಚಿ ಚನ್ನಕೇಶವ, ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ನಿರ್ಮಲಾ, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ, ಬಿಜೆಪಿ ಟೌನ್ ಅಧ್ಯಕ್ಷ ಸಂದೀಪ್, ಜಿಲ್ಲಾ ಮಾಧ್ಯಮ ಪ್ರಮುಖ್ ರಮೇಶ್ ಕುಮಾರ್, ತಾಪಂ ಮಾಜಿ ಅಧ್ಯಕ್ಷ ಎಸ್.ಎಂ. ನಾರಾಯಣಸ್ವಾಮಿ ಹಾಗೂ ಬಿಜೆಪಿ ಪದಾಧಿಕಾರಿಗಳು ಇದ್ದರು.
You seem to have an Ad Blocker on.
To continue reading, please turn it off or whitelist Udayavani.