![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Apr 18, 2024, 12:47 PM IST
ಉದಯವಾಣಿ ಸಮಾಚಾರ
ಮೈಸೂರು: ರಾಜ್ಯದ ಪ್ರತಿಷ್ಠಿತ ಕಣಗಳಲ್ಲಿ ಒಂದಾದ ಹಾಗೂ ಹಲವು ರಾಜಕೀಯ ಏರಿಳಿತ ಕಂಡಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಮತ್ತೆ ಮುಖಾಮುಖಿಯಾಗಿದ್ದು, ಎರಡೂ ಪಕ್ಷಗಳಿಂದ ಕಣದಲ್ಲಿರುವ ಅಭ್ಯರ್ಥಿಗಳು ಲೋಕ ಚುನಾವಣೆಗೆ ಹೊಸಬರಾಗಿರುವುದು ವಿಶೇಷ.
ಕಳೆದೆರಡು ದಶಕಗಳಿಂದ ಪ್ರಬಲವಾಗಿ ಬೇರೂರಿರುವ ಬಿಜೆಪಿಯನ್ನು ಈ ಬಾರಿ ಮಣಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದ್ದು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅಖಾಡಕ್ಕೆ ಧುಮುಕಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವರ್ಸಸ್ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಈ ಎರಡೂ ಪಕ್ಷಗಳ ಅಭ್ಯರ್ಥಿಗಳು ಲೋಕ ಚುನಾವಣೆಗೆ ಹೊಸ ಮುಖ.
ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಚುನಾವಣಾ ರಾಜಕೀಯ ಅನುಭವವಿದ್ದರೆ, ಮೈತ್ರಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದು ವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕೀಯ ಅನುಭವ ಇಲ್ಲವಾದರೂ ಯದು ವಂಶದ ಜನಪರ ಆಡಳಿತದ ಪ್ರಭಾವಳಿಯೂ ಇವರಿಗೆ ಪೂರಕವಾಗಿದೆ. ಒಕ್ಕಲಿಗ ಮತದಾರರೇ ಹೆಚ್ಚಿರುವ ಕ್ಷೇತ್ರದಲ್ಲಿ ಬಿಜೆಪಿ ಕಳೆ ದೆರಡು ಚುನಾವಣೆಗಳಲ್ಲಿ ಒಕ್ಕಲಿಗ ಸಮುದಾ ಯಕ್ಕೆ ಸೇರಿದ್ದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಿ, ಗೆಲವು ಕಂಡಿತ್ತು. ಆದರೆ, ಈ ಬಾರಿ ಪ್ರತಾಪ್ ಸಿಂಹ ಬದಲು ರಾಜವಂಶಸ್ಥ ಯದುವೀರ್ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಒಕ್ಕಲಿಗ ಸಮುದಾಯದ ಮತ ಪಲಾಯನವಾಗು ವುದನ್ನು ತಪ್ಪಿಸಲು ಜೆಡಿಎಸ್ನೊಂದಿಗಿನ ಮೈತ್ರಿ ಪ್ಲಸ್ ಪಾಯಿಂಟ್ ಆಗುವುದೇ ಎಂದು ಕಾದು ನೋಡಬೇಕಿದೆ.
ಸಿಎಂಗೆ ತವರಿನ ಪ್ರತಿಷ್ಠೆ: ಜಿಲ್ಲೆಯು ಮುಖ್ಯ ಮಂತ್ರಿ ಹಾಗೂ ಇಬ್ಬರು ಸಚಿವರನ್ನು ಹೊಂದಿದ್ದು, ಶತಾಯಗತಾಯ ಈ ಬಾರಿ ಮೈಸೂರು-ಕೊಡಗು ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡು ತಮ್ಮ ವರ್ಚಸ್ಸನ್ನು ಕಾಪಾಡಿಕೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಚುನಾವಣೆ ಘೋಷಣೆ ಬಳಿಕ ಮೈಸೂರಿಗೆ ಮೂರು ಬಾರಿ ಪ್ರವಾಸ ಕೈಗೊಂಡು ಮೂರ್ನಾಲ್ಕು ದಿನ ವಾಸ್ತವ್ಯ ಹೂಡಿ, ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದ್ದು, ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕೆ ಪ್ರತಿಯೊಬ್ಬರೂ ಟೊಂಕಕಟ್ಟಿ ನಿಲ್ಲಬೇಕು ಎಂದು ಕಟ್ಟಪ್ಪಣೆ ಮಾಡಿದ್ದಾರೆ. ಇತ್ತ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕೊಡಗು ಮತ್ತು ಮೈಸೂರು ಭಾಗದಲ್ಲಿ ಮಿಂಚಿನ ಸಂಚಾರ ನಡೆಸುವ ಮೂಲಕ ಮತಗಳ ಕ್ರೋಢಿಕರಣಕ್ಕೆ ಮುಂದಾಗಿದ್ದಾರೆ.
ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ: ಇತ್ತ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆದಿರುವ ಬಿಜೆಪಿಯೂ ರಾಜ್ಯ ನಾಯಕರಾದ
ಮೈತ್ರಿ ಪಕ್ಷದ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಸಿ.ಟಿ. ರವಿ, ಡಾ.ಸಿ.ಎನ್. ಅಶ್ವತ್ಥ ನಾರಾ ಯಣ್ ಅವರನ್ನು ಕ್ಷೇತ್ರಕ್ಕೆ ಕರೆಯಿಸಿ ನಾವು ಒಕ್ಕಲಿಗರ ವಿರೋಧಿಯಲ್ಲ ಎಂಬ ಸಂದೇಶ ನೀಡಿದೆ. ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕ್ಷೇತ್ರದ ಪೂರ್ಣ ಚಟುವಟಿಕೆಯನ್ನು ತಮ್ಮ ಕಣ್ಗಾವಲಿನಲ್ಲಿಟ್ಟುಕೊಂಡಿದ್ದಾರೆ. ಇದರೊಂದಿಗೆ ಕಾರ್ಯಕರ್ತರಿಗೆ ಮತ್ತಷ್ಟು ಪುಷ್ಠಿ
ತುಂಬಲು ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ಸಮಾವೇಶಕ್ಕೆ ವೇದಿಕೆ ಸಜ್ಜುಗೊಳಿಸ ಲಾಗಿದೆ.
ಟೆಲಿಕಾಲರ್ ಮೊರೆ ಹೋದ ಕಾಂಗ್ರೆಸ್: ತನ್ನ ಅಭ್ಯರ್ಥಿಯ ಗೆಲುವಿಗಾಗಿ ತಂತ್ರಜ್ಞಾನದ ಮೊರೆ ಹೋಗಿರುವ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟೆಲಿಕಾಲರ್ ಮೂಲಕ ಮತ ಯಾಚನೆ ಶುರು ಮಾಡಿದ್ದಾರೆ. ಕ್ಷೇತ್ರದ ಎಲ್ಲಾ ಮತದಾರರಿಗೆ ಪಕ್ಷದ ಅಭ್ಯರ್ಥಿ ಮತ್ತು ಮುಖ್ಯಮಂತ್ರಿಗಳಿಬ್ಬರೂ ಮುದ್ರಿತ ಧ್ವನಿಯಲ್ಲಿ ತಮ್ಮ ಸರ್ಕಾರದ ಗ್ಯಾರಂಟಿ
ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಮತ ಯಾಚನೆಗೆ ಇಳಿದಿದ್ದಾರೆ.
ಪ್ರಸಾದ್ ನಿವೃತ್ತಿಯ ಪರಿಣಾಮವೇನು: ಹಳೇ ಮೈಸೂರು ಭಾಗದಲ್ಲಿ ಪ್ರಭಾವಿ ದಲಿತ ನಾಯಕರೆನಿಸಿಕೊಂಡಿರುವ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಚುನಾವಣೆ ಹೊತ್ತಿನಲ್ಲಿಯೇ ಸಕ್ರಿಯ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದರಿಂದ ಮೈಸೂರು-ಕೊಡಗು ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ದಲಿತ ಮತಗಳು
ಯಾವ ಪ್ರಮಾಣದಲ್ಲಿ ಕೈ ಹಿಡಿಯಲಿವೆ ಎಂಬುದನ್ನು ಮುಂದೆ ನೋಡಬೇಕಿದೆ. ಅಲ್ಲದೇ, ಪ್ರಸಾದ್ ಅವರನ್ನು ಹೊರತುಪಡಿಸಿ,
ಅವರ ಅಳಿಯಂದಿರು ಮತ್ತು ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಆ ಪಕ್ಷಕ್ಕೆ ಎಷ್ಟು ಬಲ ತುಂಬಲಿದೆ ಎನ್ನುವುದು
ಕ್ಷೇತ್ರದ ಜನರನ್ನು ಕುತೂಹಲಕ್ಕೆ ದೂಡಿದೆ.
ರಂಗೇರಲಿದೆ ಚುನಾವಣಾ ಕಣ: ಇದೀಗ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಚುನಾವಣಾ ಕಣ ರಂಗೇರಿದ್ದು, ಪ್ರಮುಖ
ಎರಡು ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಸತತ ಎರಡು ಬಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿರುವುದರಿಂದ ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ನಾಯಕರು ಹೋರಾಟ ನಡೆಸುತ್ತಿದ್ದಾರೆ. ಇವರಿಗೆ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರು ಕೂಡ ಸಾಥ್ ನೀಡುತ್ತಿದ್ದಾರೆ.
ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ಪೀಕರಿಸಿದ್ದು, ಶತಾಯ ಗತಾಯ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕು ಎಂಬ ಪಣತೊಟ್ಟಿದ್ದಾರೆ. ಈ ಸಂಬಂಧ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಒಟ್ಟಿಗೆ ಏ.13 ಮತ್ತು 14 ರಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಅವರಿಗೆ ಸಚಿವರಾದ ಕೆ.ವೆಂಕಟೇಶ್, ಡಾ.ಎಚ್. ಸಿ.ಮಹದೇವಪ್ಪ ಹಾಗೂ ಕಾಂಗ್ರೆಸ್ ಸ್ಥಳೀಯ ಶಾಸಕರು ಸಾಥ್ ನೀಡಲಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಪರ ಭಾನುವಾರ ಪ್ರಧಾನಿ ನರೇಂದ ಮೋದಿ ಪ್ರಚಾರ ನಡೆಸಲಿದ್ದಾರೆ. ಅವರಿಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,
ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಮೈತ್ರಿ ಪಕ್ಷಗಳ ಸ್ಥಳೀಯ ನಾಯಕರು ಸಾಥ್ ನೀಡಲಿದ್ದಾರೆ.
■ ಸತೀಶ್ ದೇಪುರ
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.