![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jul 9, 2023, 7:57 AM IST
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ಹರಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ನಡ್ಡಾ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಜುಲೈ 21ಕ್ಕೆ ಮಂದೂಡಿದೆ.
ಪ್ರಕರಣದ ಹಿನ್ನೆಲೆ:
2023ರ ಮೇ 7ರಂದು ಐ.ಬಿ. ವೃತ್ತದಲ್ಲಿ ಬಿಜೆಪಿ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಡ್ಡಾ ಅವರು ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಬಂದರೆ ಕೇಂದ್ರದ ಯೋಜನೆಗಳೆಲ್ಲ ರಾಜ್ಯದಲ್ಲಿ ಮಂದುವರಿಯುತ್ತವೆ. ಇಲ್ಲದಿದ್ದರೆ ವಂಚಿತರಾಗಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೇಂದ್ರದ ಹಲವು ಯೋಜನೆಗಳು ಬಂದ್ ಆಗಲಿವೆ. ಅಭಿವೃದ್ಧಿ ಬೇಕಾದ್ರೆ ಬಿಜೆಪಿ ಗೆಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದರು. ಇದರ ವಿರುದ್ಧ ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಹರಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಪ್ರಕರಣ ರದ್ದುಪಡಿಸುವಂತೆ ಕೋರಿ ನಡ್ಡಾ ಹೈಕೋರ್ಟ್ ಮೆಟ್ಟಿಲೇರಿದ್ದರು.
You seem to have an Ad Blocker on.
To continue reading, please turn it off or whitelist Udayavani.