![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 15, 2022, 11:21 AM IST
ಸಾಂದರ್ಭಿಕ ಚಿತ್ರ
ಪುತ್ತೂರು: ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಅತೀದೊಡ್ಡ ಬಸ್ ನಿಲ್ದಾಣವಾಗಿರುವ ಪುತ್ತೂರು ಕೆ.ಎಸ್.ಆರ್ .ಟಿ.ಸಿ ಬಸ್ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿಟ್ಟು ಸರಕಾರ ಆದೇಶ ಹೊರಡಿಸಿದೆ.
ಕೋಟಿ ಚೆನ್ನಯರ ಹೆಸರನ್ನು ಪುತ್ತೂರು ಬಸ್ ನಿಲ್ದಾಣಕ್ಕೆ ಇಡುವ ಸಂಬಂಧ ಸಾರಿಗೆ ಸಚಿವ ಶ್ರೀರಾಮಲು ಅವರ ಸೂಚನೆಯ ಮೇರೆಗೆ ಇಲಾಖೆಯು ಆದೇಶ ನೀಡುವ ಮೂಲಕ ಹಲವು ಕಾಲದ ಬೇಡಿಕೆಗೆ ಸ್ಪಂದನೆ ಸಿಕ್ಕಿದೆ. ಕೆ.ಎಸ್.ಆರ್.ಟಿ.ಸಿ. ಗೆ ಸೇರಿದ ಜಾಗದಲ್ಲಿ ಖಾಸಗಿಯವರು ಬಸ್ ನಿಲ್ದಾಣ ಕಟ್ಟಿದ್ದು, ಇದು ಜಿಲ್ಲೆಯಲ್ಲಿ ಸರಕಾರಿ ಖಾಸಗಿ ಸಹಭಾಗಿತ್ವದ (ಪಿಪಿಪಿ) ಅತಿದೊಡ್ಡ ಬಸ್ ನಿಲ್ದಾಣ ಎಂಬ ಹೆಗ್ಗಳಿಕೆ ಹೊಂದಿದೆ.
ಶಾಸಕರ ಪ್ರಯತ್ನ
ಶಾಸಕ ಸಂಜೀವ ಮಠಂದೂರು ಅವರ ಬೆಂಬಿಡದ ಪ್ರಯತ್ನದ ಫಲವಾಗಿ ಯೋಜನೆ ಕೈಗೂಡಿದೆ. ಈ ಹಿಂದೆ ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಂ. ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುತ್ತೂರು ಬಸ್ ನಿಲ್ದಾಣಕ್ಕೆ “ಕೋಟಿ ಚೆನ್ನಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಪುತ್ತೂರು’ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳಲಾಗಿತ್ತು. ಪುತ್ತೂರು ನಗರಸಭೆ 2020ರಲ್ಲಿ ಕೋಟಿ ಚೆನ್ನಯರ ಅಭಿದಾನವನ್ನು ಬಸ್ ನಿಲ್ದಾಣಕ್ಕೆ ನೀಡುವ ನಿರ್ಣಯ ಅಂಗೀಕರಿಸಿ ಸರಕಾರಕ್ಕೆ ಕಳುಹಿಸಿತ್ತು. ಶಾಸಕ ಸಂಜೀವ ಮಠಂದೂರು ಸರಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ, ನಗರಸಭೆ ನಿರ್ಣಯದ ಪ್ರತಿಯನ್ನು ತಮ್ಮ ಶಿಫಾರಸು ಪತ್ರದ ಮೂಲಕ ಕೆ.ಎಸ್.ಆರ್.ಟಿ.ಸಿ.ಗೆ ಸಲ್ಲಿಸಿದ್ದರು. ಬಳಿಕ ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಚಂದ್ರಪ್ಪ ಜತೆ ಮಾತುಕತೆ ನಡೆಸಿದ್ದರು. ತಾಂತ್ರಿಕ ಕಾರಣ ಅಡ್ಡಿ ಉಂಟಾಗಿ ಪ್ರಕ್ರಿಯೆ ಪೂರ್ಣಗೊಳ್ಳಲು ವಿಳಂಬವಾಗಿತ್ತು. ಇದೀಗ ಸಾಕಾರಗೊಂಡಿದೆ.
ಹಲವರ ಬೇಡಿಕೆ
ಯುವವಾಹಿನಿ ಪುತ್ತೂರು ಘಟಕದ ವತಿಯಿಂದ 2 ವರ್ಷಗಳ ಹಿಂದೆ ಶಾಸಕರಿಗೆ ಮನವಿ ಸಲ್ಲಿಸಿ ಅವಳಿ ವೀರರ ಹೆಸರನ್ನು ಪುತ್ತೂರು ಬಸ್ ನಿಲ್ದಾಣಕ್ಕೆ ಇಡುವಂತೆ ಕೋರಲಾಗಿತ್ತು. ದೇಯಿ ಬೈದ್ಯೆತಿ- ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಿಲ್ ವತಿಯಿಂದ ಮನವಿ ಮಾಡಲಾಗಿತ್ತು. ಪಡುಮಲೆಯ ಕೋಟಿ ಚೆನ್ನಯ ಜನ್ಮಸ್ಥಳ ಸಂಚಾಲನ ಸಮಿತಿಯಿಂದ ಪುತ್ತೂರು ನಗರಸಭೆಗೆ ಮನವಿ ಸಲ್ಲಿಸಲಾಗಿತ್ತು. ಹೀಗೆ ಸತತ ಮನವಿಗಳ ಹಿನ್ನೆಲೆ ಮತ್ತು ಶಾಸಕರ ಪ್ರಯತ್ನ ಇದೀಗ ಫಲ ನೀಡಿದೆ.
ಮೂಲ ಊರು
ತುಳುನಾಡಿನಾದ್ಯಂತ 250ಕ್ಕಿಂತಲೂ ಅಧಿಕ ಗರಡಿಗಳಲ್ಲಿ ಉಪಾಸನೆ ಪಡೆಯುತ್ತಿರುವ ಕೋಟಿ ಚೆನ್ನಯರ ಮೂಲ ಊರು ಪುತ್ತೂರು. ಹೀಗಾಗಿ ಪುತ್ತೂರು ಬಸ್ ನಿಲ್ದಾಣಕ್ಕೆ ವೀರರ ಹೆಸರು ಸೂಕ್ತವೆಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಕೋಟಿ ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿ ನಂದನ ಬಿತ್ತಿಲ್, ಕೋಟಿ ಚೆನ್ನಯರ ಜನ್ಮಸ್ಥಳ ಪಡುಮಲೆ, ಬಲ್ಲಾಳರ ಬೀಡು, ಸ್ವರ್ಣಕೇದಗೆ ಬೆಳೆದ ಮನೆಯೂ ಸೇರಿದಂತೆ ಅವಳಿ ವೀರರ ಬದುಕಿನ ಕುರುಹುಗಳು ಇಲ್ಲಿವೆ. ದೇಯಿ ಬೈದ್ಯೆತಿ ಔಷಧಿವನ ಮುಡಿಪುನಡ್ಕದಲ್ಲಿದೆ.
ಮೂರೂವರೆ ಎಕ್ರೆ ಬಸ್ ನಿಲ್ದಾಣ
ಕೆ.ಎಸ್.ಆರ್.ಟಿ.ಸಿ.ಗೆ ಸೇರಿದ ಸುಮಾರು ಮೂರೂವರೆ ಎಕ್ರೆ ಪ್ರದೇಶದಲ್ಲಿ ಪುತ್ತೂರು ಬಸ್ ನಿಲ್ದಾಣ ನಿರ್ಮಾಣವಾಗಿದೆ. ಹಿಂದುಸ್ಥಾನ್ ಪ್ರೊಮೋಟರ್ಸ್ ಮತ್ತು ಡೆವಲಪರ್ಸ್ ಸಂಸ್ಥೆ 33 ಕೋಟಿ ರೂ. ವೆಚ್ಚದಲ್ಲಿ ಬಸ್ ಟರ್ಮಿನಲ್ ಹಾಗೂ ವಾಣಿಜ್ಯ ಮಳಿಗೆ ನಿರ್ಮಿಸಿದೆ. 33 ವರ್ಷಗಳ ಕಾಲ ಇದರ ನಿರ್ವಹಣೆ ಈ ಸಂಸ್ಥೆಗೆ ಸೇರಿದೆ. 2016ರ ಜನವರಿ 9ರಂದು ಅಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಸ್ ಟರ್ಮಿನಲ್ ಉದ್ಘಾಟಿಸಿದ್ದರು.
ಬೇಡಿಕೆಗೆ ಸ್ಪಂದನೆ: ಕಾರಣಿಕ ಶಕ್ತಿಗಳಾದ ಕೋಟಿ ಚೆನ್ನಯರ ಹುಟ್ಟೂರಿನಲ್ಲಿ ಇರುವ ತಾಲೂಕು ಬಸ್ ನಿಲ್ದಾಣಕ್ಕೆ ಅವಳಿ ವೀರರ ಹೆಸರು ಇಡಬೇಕು ಎನ್ನುವ ಬೇಡಿಕೆಗೆ ಸ್ಪಂದನೆ ಸಿಕ್ಕಿದೆ. ಸಚಿವ ಶ್ರೀರಾಮಲು ಅವರು ನಮ್ಮ ಬೇಡಿಕೆಗೆ ಸ್ಪಂದಿಸಿದ್ದಾರೆ. ಇದೀಗ ಕೋಟಿ ಚೆನ್ನಯ ಹೆಸರು ಅಂತಿಮ ಗೊಂಡಿರುವ ಆದೇಶ ದೊರೆತಿದೆ. –ಸಂಜೀವ ಮಠಂದೂರು, ಶಾಸಕರು, ಪುತ್ತೂರು
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.