![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 24, 2022, 11:24 AM IST
ಕಲಬುರಗಿ: ರಾಜ್ಯದ ವಿವಿಧೆಡೆ ಕೋಮು ಸಂಘರ್ಷಗಳು ಹೆಚ್ಚಾಗುತ್ತಿರುವುದರಿಂದ ಸಮಾಜದಲ್ಲಿ ಸೌಹಾರ್ದ ವಾತಾವರಣ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಮೇ ತಿಂಗಳಲ್ಲಿ ಸರ್ವಧರ್ಮ ಸಮಾವೇಶ ಆಯೋಜಿಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿ, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಹಲವು ಕಡೆ ಬಿಜೆಪಿ ಮುಖಂಡರು ಕೋಮು ಗಲಭೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ, ಜಿಲ್ಲೆಯಲ್ಲಿ ಇದೂವರೆಗೆ ಯಾವತ್ತೂ ಹಿಂದೂ ಮುಸ್ಲಿಮರ ಮಧ್ಯೆ ಸಂಘರ್ಷ ನಡೆದಿಲ್ಲ. ಇಲ್ಲಿಯೂ ದುಷ್ಟಶಕ್ತಿಗಳು ತಲೆಹಾಕುವ ಮುನ್ನವೇ ನಾವು ಸೌಹಾರ್ದ ಸಮಾವೇಶ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಈ ಸಮಾವೇಶವನ್ನು ಕಾಂಗ್ರೆಸ್ ಪಕ್ಷ ದಿಂದ ಆಯೋಜಿಸಬೇಕೋ ಅಥವಾ ಎಲ್ಲ ಧರ್ಮಗಳ ಸಂಘಟನೆಗಳನ್ನು ಒಳ ಗೊಂಡು ಆಯೋಜಿಸಬೇಕೋ ಎಂಬ ಬಗ್ಗೆ ಶೀಘ್ರದಲ್ಲೇ ಚರ್ಚಿಸಿ ತೀರ್ಮಾನಿಸಲಾಗುವುದು. ದಿನಾಂಕ ಹಾಗೂ ಸ್ಥಳ ನಿಗದಿ ಮಾಡಲಾಗುವುದು. ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳದ ಸುಮಾರು 50ಕ್ಕೂ ಹೆಚ್ಚು ಮಠಾಧೀಶರನ್ನು ಇದಕ್ಕೆ ಆಹ್ವಾನಿಸಲಾಗುವುದು. ಶಾಸಕರಾದ ಪ್ರಿಯಾಂಕ್ ಖರ್ಗೆ ಹಾಗೂ ಡಾ| ಅಜಯಸಿಂಗ್ಗೆ ಉಸ್ತುವಾರಿ ವಹಿಸಲಾಗಿದೆ. ಸಮಾವೇಶವು ಜಿಲ್ಲೆಯಲ್ಲಿಯೇ ಐತಿಹಾಸಿಕ ಗುರುತಾಗಿ ಉಳಿಯುವಂತೆ ಮಾಡಲಾಗುವುದು ಎಂದರು.
ಕೆಪಿಸಿಸಿಗೆ ನನ್ನನ್ನು ಹಾಗೂ ಡಾ| ಶರಣಪ್ರಕಾಶ ಪಾಟೀಲ ಅವರನ್ನು ಉಪಾಧ್ಯಕ್ಷರನ್ನಾಗಿ, ಶರಣಕುಮಾರ ಮೋದಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪಕ್ಷದ ಮುಖಂಡರು ನಮಗೆ ಜವಾಬ್ದಾರಿ ನೀಡಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಓಡಾಡಿ ಸಂಘಟನೆ ಮಾಡಲಾಗುವುದು. ಪರಿಶಿಷ್ಟರು, ತುಳಿತಕ್ಕೆ ಒಳಗಾದವರು, ನಿಷ್ಠಾವಂತರನ್ನು ಪಕ್ಷಕ್ಕೆ ತೆಗೆದುಕೊಂಡು ಬಲಿಷ್ಠ ಸಂಘಟನೆ ಮಾಡಲಾಗುವುದು. ಸ್ಥಳೀಯವಾಗಿ ಕೆಲವರು ಪಕ್ಷ ಬಿಟ್ಟುಹೋಗಿದ್ದು ಅವರನ್ನು ಪುನಃ ಕರೆತರಲಾಗುವುದು ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣ ಕುಮಾರ ಮೋದಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎಂಬ ಬಗ್ಗೆ ಚರ್ಚಿಸಲು ಏ. 27, 28ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. ಸಭೆಯಲ್ಲಿ ಪಕ್ಷದ ಉಸ್ತುವಾರಿ ಸುರ್ಜಾವಾಲ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಮುಖಂಡರಾದ ನೀಲಕಂಠರಾವ್ ಮೂಲಗೆ, ಭೀಮಣ್ಣ ಸಾಲಿ, ರಮೇಶ ಯರಗೋಳ, ಬಸವರಾಜ ಬೂದಿಹಾಳ, ಶಾಮ ನಾಟಿಕಾರ್ ಮುಂತಾದವರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.