![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 11, 2024, 11:12 PM IST
ಹುಬ್ಬಳ್ಳಿ/ಬೆಂಗಳೂರು/ಮಣಿಪಾಲ: ರಾಜ್ಯದ ದಕ್ಷಿಣ ಹಾಗೂ ಉತ್ತರ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ಹಾಗೂ ಕೊಪ್ಪಳದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುರಿದ ಮಳೆ ಸಾಕಷ್ಟು ಅವಘಡಗಳನ್ನೇ ಸೃಷ್ಟಿಸಿದ್ದು, ಬೆಳಗಾವಿ ಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಬೆಳಗಾವಿ, ಧಾರವಾಡ, ಚಿಕ್ಕಮಗ ಳೂರು, ಚಿತ್ರದುರ್ಗ, ರಾಯಚೂರು ಹಾಗೂ ಉತ್ತರಕನ್ನಡ ಜಿಲ್ಲೆಯ ಹಲವೆಡೆ ಶನಿವಾರ ಗುಡುಗು-ಸಿಡಿಲು ಹಾಗೂ ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಮರ-ಗಿಡಗಳು ಧರೆಗುರುಳಿವೆ. ಅಂಗಡಿ-ಮುಂಗಟ್ಟು ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಹಲವೆಡೆ ರಸ್ತೆಗಳಲ್ಲೇ ನೀರು ಹರಿದು ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಸಿಡಿಲಿಗೆ ಕಾರ್ಮಿಕ ಬಲಿ
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಿ ಸಿಡಿಲು ಬಡಿದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಶ್ರೀಕಿಶನ್ (56) ಸಾವನ್ನಪ್ಪಿದ್ದು, ಬಿಹಾರ ಮೂಲದ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ತಾವರಾಗೇರಾ ಸಮೀಪದ ಹಿರೇಮುಕರ್ತನಾಳ ಗ್ರಾಮದ ಹೊಲದಲ್ಲಿ ಕುರಿಕಾಯು ತ್ತಿದ್ದ ಕನಕರಾಯಪ್ಪ ಕಾಟಾಪುರ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಜಂಗಿರಾಂಪುರ ತಾಂಡಾದಲ್ಲಿ ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಹನುಮಂತ ಮೇಘಪ್ಪ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ, ಮೂಡಿಗೆರೆ, ಕಳಸ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ಹಾಗೂ ಚಿಕ್ಕಮಗಳೂರು ನಗರದ ಕೆಲವೆಡೆ ಮಳೆಯಾಗಿದೆ. ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮಧ್ಯಾಹ್ನದ ವೇಳೆ ಆರಂಭವಾದ ಮಳೆ ರಾತ್ರಿವರೆಗೂ ಮುಂದುವರಿದಿತ್ತು. ಬಹುತೇಕ ಕಡೆ ರಸ್ತೆಗಳಲ್ಲೇ ನೀರು ಹರಿದು, ಜನ ಹಾಗೂ ವಾಹನ ಸಂಚಾರಕ್ಕೆ ಪರದಾಡಬೇಕಾಯಿತು. ಕೆಲವು ಅಡಿಗಳಷ್ಟು ನೀರು ನಿಂತಿದ್ದ ಪರಿಣಾಮ ದ್ವಿಚಕ್ರ ವಾಹನಗಳು ಅರ್ಧದಷ್ಟು ಮುಳುಗಿದ್ದವು. ಬೆಳಗಾವಿ ಜಿಲ್ಲೆಯಲ್ಲೂ ನಗರ ಸಹಿತ ಗ್ರಾಮೀಣ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಚಿತ್ರದುರ್ಗ ನಗರ ಹಾಗೂ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸುರಿದ ಮಳೆ ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದೆ.
ಮಳೆ ಗಾಳಿಗೆ ನೆಲಕ್ಕೊರಗಿದ ಬಾಳೆ ಫಸಲು
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ಗಾಳಿ ಸಹಿತ ಮಳೆಗೆ ಭಾರಿ ಗಾತ್ರದ ಆಲದ ಮರ ಬಿದ್ದು ನಾಲ್ಕು ಮನೆಗಳು ಜಖಂಗೊಂಡಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಿರಿಯಾಪಟ್ಟಣದಲ್ಲೂ ಧಾರಾಕಾರ ಮಳೆಯಾಗಿದೆ. ಚಾಮರಾಜನಗರದಲ್ಲಿ ಶನಿವಾರ ಮಧ್ಯಾಹ್ನ ಗಾಳಿ ಮಳೆಯಿಂದಾಗಿ ಬ್ಯಾಡಮೂಡ್ಲು ಗ್ರಾಮದ ಶ್ರೀನಿವಾಸ್ ಎಂಬವರ ಜಮೀನಿನಲ್ಲಿ ಬೆಳೆದಿದ್ದ ಸುಮಾರು 1,500 ಬಾಳೆಗಿಡಗಳು ನೆಲಕಚ್ಚಿದವು. ಹಾಸನ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಜೆ ಹಾಗೂ ಶನಿವಾರ ಮಧ್ಯಾಹ್ನ ಸಾಧಾರಣ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲೂ ಧಾರಾಕಾರ ಮಳೆಯಾಗಿದೆ.
You seem to have an Ad Blocker on.
To continue reading, please turn it off or whitelist Udayavani.