![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 18, 2022, 7:10 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ನಾಲ್ಕು ರಾಜ್ಯಸಭೆ ಹಾಗೂ ಏಳು ವಿಧಾನಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಮೂರೂ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಾದು ನೋಡುವ ತಂತ್ರ ಅನುಸರಿಸುತ್ತಿರುವುದು ಕುತೂಹಲ ಮೂಡಿಸಿದೆ.
ಪರಿಷತ್ಗೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಹೆಚ್ಚುವರಿ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ಗಳೂ ಕಂಡುಬರುತ್ತಿವೆ. ಆ ರೀತಿ ಆಗಿದ್ದೇ ಆದರೆ ಎರಡೂ ಚುನಾವಣೆ ಸ್ವರೂಪ ಬದಲಾಗಲಿದ್ದು ಕುದುರೆ ವ್ಯಾಪಾರದ ಭೀತಿ ಎದುರಾಗಬಹುದು.
ರಾಜ್ಯಸಭೆಯ ನಾಲ್ಕು ಸ್ಥಾನಗಳ ಪೈಕಿ ಸಂಖ್ಯಾ ಬಲದ ಪ್ರಕಾರ ಒಬ್ಬ ಅಭ್ಯರ್ಥಿ ಗೆಲುವಿಗೆ 45 ಮತಗಳು ಬೇಕಾಗಿದ್ದು, ಬಿಜೆಪಿ ಎರಡು, ಕಾಂಗ್ರೆಸ್ ಒಂದು ಸ್ಥಾನ ಗೆಲ್ಲಬಹುದು. ಆದರೆ ಕಾಂಗ್ರೆಸ್ ಎರಡನೇ ಅಭ್ಯರ್ಥಿ ಅಥವಾ ಬಿಜೆಪಿ ಮೂರನೇ ಅಭ್ಯರ್ಥಿ ಹಾಕುವ ಲೆಕ್ಕಾಚಾರ ನಡೆಯುತ್ತಿದ್ದು ನಾನಾ ವ್ಯಾಖ್ಯಾನಗಳು ಕೇಳಿಬರುತ್ತಿವೆ.
32 ಸಂಖ್ಯಾಬಲ ಹೊಂದಿರುವ ಜೆಡಿಎಸ್ ಸಹ ಅಭ್ಯರ್ಥಿ ಹಾಕಲು ಚಿಂತನೆ ನಡೆಸಿರುವ ನಡೆ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಯವರು, ರಾಜ್ಯಸಭೆ ಚುನಾ ವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದಿದ್ದಾರೆ. ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಇದೀಗ ತಲೆಬಿಸಿ ಮಾಡಿಕೊಂಡಿವೆ. ಜೆಡಿಎಸ್ ಅಭ್ಯರ್ಥಿ ಹಾಕುವುದಾದರೆ ಯಾರ ಮತಬುಟ್ಟಿಗೆ ಕೈ ಹಾಕಬಹುದು ಎಂಬ ಚರ್ಚೆ ಪ್ರಾರಂಭವಾಗಿದೆ.
ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ಆಯ್ಕೆ ಖಚಿತ.ಮತ್ತೊಂದು ಸ್ಥಾನಕ್ಕೆ ನಿರ್ಮಲ್ ಕುಮಾರ್ ಸುರಾನಾ, ಲೆಹರ್ಸಿಂಗ್, ಹಾಲಿ ಸದಸ್ಯ ಕೆ.ಸಿ. ರಾಮ ಮೂರ್ತಿ ಹೆಸರು ಪ್ರಮುಖವಾಗಿದೆ. ಜತೆಗೆ ಉತ್ತರ ಕರ್ನಾಟಕ ಭಾಗದ ದಲಿತ ಅಥವಾ ಹಿಂದುಳಿದ ಸಮುದಾಯದ ಅಚ್ಚರಿ ಅಭ್ಯರ್ಥಿ ಹೆಸರು ಘೋಷಣೆಯಾಗಬಹುದು ಎಂಬ ಮಾತು ಗಳು ಕೇಳಿಬರುತ್ತಿವೆ.
ಜತೆಗೆ ಮೂರನೇ ಅಭ್ಯರ್ಥಿಯಾಗಿ ಉದ್ಯಮಿ ಪ್ರಕಾಶ್ ಶೆಟ್ಟಿ ಹಾಗೂ ಲಹರಿ ವೇಲು ಅವರನ್ನು ಕಣಕ್ಕಿಳಿಸುವ ವಿಚಾರ ಚರ್ಚೆಯಲ್ಲಿದೆ. ಇತ್ತ ಕಾಂಗ್ರೆಸ್ನಲ್ಲಿ ಜೈರಾಮ್ ರಮೇಶ್ ಪುನರಾಯ್ಕೆ ಬಗ್ಗೆ ವಿರೋಧ ಇರುವುದರಿಂದ ಪರ್ಯಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಸೇರಿ ಹಲವರ ಹೆಸರು ಪರಿಶೀಲನೆಯಲ್ಲಿದೆ.
ಮುದ್ದಹುನುಮೇಗೌಡಗೆ ಬಿಜೆಪಿ ಗಾಳ ಹಾಕಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಲು ಮುಂದಾಗಿರುವುದರಿಂದ ಅವರನ್ನು ಕಾಂಗ್ರೆಸ್ನಲ್ಲೇ ಉಳಿಸಿಕೊಳ್ಳುವ ಕಸರತ್ತನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಡುತ್ತಿದ್ದಾರೆ.
ಕಾಂಗ್ರೆಸ್ ಒಬ್ಬ ಅಭ್ಯರ್ಥಿ ಗೆಲ್ಲಿಸಿಕೊಂಡ ಅನಂತರವೂ ಹೆಚ್ಚುವರಿಯಾಗಿ 25 ಮತಗಳನ್ನು ಹೊಂದಿದೆ. ಬಿಜೆಪಿ ಎರಡು ಅಭ್ಯರ್ಥಿ ಗೆಲ್ಲಿಸಿಕೊಂಡ ಅನಂತರವೂ 30 ಮತಗಳನ್ನು ಹೆಚ್ಚುವರಿಯಾಗಿ ಹೊಂದಿದೆ. ಜೆಡಿಎಸ್ಗೆ ಒಂದು ಸ್ಥಾನ ಗೆಲ್ಲಲು 13 ಮತಗಳ ಕೊರತೆಯಿದೆ.
ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಕಾಂಗ್ರೆಸ್ ಎರಡನೇ ಅಭ್ಯರ್ಥಿ, ಬಿಜೆಪಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸಿದರೆ ಚುನಾವಣಾ ಕಣದ ಚಿತ್ರಣವೇ ಬದಲಾಗಲಿದೆ. ಇನ್ನು ವಿಧಾನಪರಿಷತ್ ಚುನಾವಣೆ ವಿಚಾರಕ್ಕೆ ಬಂದರೆ ತೆರವಾಗಿರುವ ಏಳು ಸ್ಥಾನಗಳಲ್ಲಿ ಬಿಜೆಪಿ ನಾಲ್ಕು, ಕಾಂಗ್ರೆಸ್ ಎರಡು ಹಾಗೂ ಜೆಡಿಎಸ್ ಒಂದು ಸ್ಥಾನ ಸುಲಭವಾಗಿ ಗೆಲ್ಲಬಹುದಾಗಿದೆ. ಇದು ಬಹುತೇಕ ಅವಿರೋಧವಾಗುವ ಸಾಧ್ಯತೆಯೇ ಹೆಚ್ಚು.
45 ಮತ ಅಗತ್ಯ
ರಾಜ್ಯಸಭೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗೆಲ್ಲಲು 45 ಮೊದಲ ಪ್ರಾಶಸ್ತ್ಯ ಮತ ಅಗತ್ಯ. ವಿಧಾನಪರಿಷತ್ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗೆಲ್ಲಲು 29 ಮೊದಲ ಪ್ರಾಶಸ್ತ್ಯ ಮತ ಬೇಕು. ವಿಧಾನಸಭೆಯಲ್ಲಿ ಬಿಜೆಪಿ-122, ಕಾಂಗ್ರೆಸ್-71 ಹಾಗೂ ಜೆಡಿಎಸ್-32 ಸಂಖ್ಯಾಬಲ ಹೊಂದಿದೆ.
ಪರಿಷತ್ಗೆ ಇಂದಿನಿಂದ ನಾಮಪತ್ರ
ವಿಧಾನಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳ ಚುನಾವಣೆಗೆ ಮೇ 19ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ವಾಯವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರ ಈ ನಾಲ್ಕು ಕ್ಷೇತ್ರಗಳಿಗೆ ಜೂ. 13ರಂದು ಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಕೆ ಆರಂಭ
ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಮಂಗಳವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೇ 24ರ ವರೆಗೆ ಕಾಲಾವಕಾಶವಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಮೇ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 31ರ ವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಯಾರಿಗೂ ಬೆಂಬಲ ನೀಡುವುದಿಲ್ಲ. ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದೇವೆ. ಇದರಲ್ಲಿ ಯಾವುದೇ ಗೊಂದಲವಿಲ್ಲ.
– ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ನಾಯಕ
ರಾಜ್ಯಸಭೆ ಚುನಾವಣೆಯಲ್ಲಿ ಮುದ್ದಹನುಮೇಗೌಡರಿಗೆ ಟಿಕೆಟ್ ಕೊಟ್ಟರೆ ಸ್ವಾಗತ. ಅವರು ಹಿರಿಯರು, ನಮ್ಮದೇ ಕ್ಷೇತ್ರದವರು.
– ಡಿ.ಕೆ. ಸುರೇಶ್, ಸಂಸದ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.