ಮೈತ್ರಿ ಸರ್ಕಾರ ಬೀಳಲು ಸಿದ್ದು, ದೇವೇಗೌಡರಿಬ್ಬರೂ ಕಾರಣ
Team Udayavani, Aug 30, 2019, 3:05 AM IST
ಕೋಲಾರ: ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಹಾಗೂ ದೇವೇಗೌಡ ಇಬ್ಬರೂ ಕಾರಣ ಎಂದು ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸ್ಪೀಕರ್ ರಮೇಶ್ಕುಮಾರ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
“ಮಾಜಿ ಸ್ಪೀಕರ್ ರಮೇಶ್ಕುಮಾರ್ ತಾವೊಬ್ಬರೇ ಸತ್ಯ ಹರಿಶ್ಚಂದ್ರ ಅಂದುಕೊಂಡಿದ್ದಾರೆ. ಸತ್ಯ ಹರಿಶ್ಚಂದ್ರರಾಗಿದ್ರೆ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನೇಕೆ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದರು. ಕಾಂಗ್ರೆಸ್ಗೆ ತತ್ವ ಸಿದ್ಧಾಂತ ಇದ್ದರೆ, ಮೊದಲು ಪಕ್ಷದಿಂದ ರಮೇಶ್ ಕುಮಾರ್ ಅವರನ್ನು ಉಚ್ಚಾಟನೆ ಮಾಡಬೇಕು ಎಂದರು. ನಾವು ಮೂಲ ಕಾಂಗ್ರೆಸ್ಸಿಗರು. ನಮ್ಮ ಬಗ್ಗೆ ಮಾತನಾಡುವ ಇವರು, ಅಧಿಕಾರಕ್ಕಾಗಿ ಕಾಂಗ್ರೆಸ್ಗೆ ಬಂದವರು.
ನಾವು ಕಟ್ಟಿದ ಕಾಂಗ್ರೆಸ್ ಮನೆಯಲ್ಲಿ ಇವರು ಸಂಸಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ಛೇಡಿಸಿದರು. “ಮೈತ್ರಿ ಸರ್ಕಾರದಲ್ಲಿ ನಾನು ಮಂತ್ರಿಯಾಗಿ ಏನನ್ನೂ ಮಾಡಲಾಗುತ್ತಿರಲಿಲ್ಲ. ಕುಮಾರಸ್ವಾಮಿ ಹಾಗೂ ರೇವಣ್ಣ ನನ್ನ ವಸತಿ ಖಾತೆಯಲ್ಲಿ ಮೂಗು ತೂರಿಸುತ್ತಿದ್ದರು. ಹೀಗಾಗಿ, ರಾಜೀನಾಮೆ ನೀಡುತ್ತೇನೆ ಎಂದು ಮೂರು ಬಾರಿ ಸಿದ್ದರಾಮಯ್ಯಗೆ ಹೇಳಿದ್ದೆ.
ಆದರೆ, ಅವರು ಏನೂ ಮಾಡಲಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಉಪ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಬಂದು ನನ್ನ ಕ್ಷೇತ್ರದಲ್ಲಿ ತೊಡೆ ತಟ್ಟಲಿ, ಇಂತಹ ತೊಡೆ ತಟ್ಟುವವರನ್ನು ನಾನು ನೋಡಿದ್ದೇನೆ ಎಂದ ಅವರು, ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುವುದಾಗಿ ಹೇಳಿದರು. ಅಲ್ಲದೆ, ಮುಂದಿನ ಚುನಾವಣೆ ವೇಳೆ, ಸ್ವತಂತ್ರವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.